ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.22: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ನಗರದ ರಸ್ತೆಗಳು, ವೃತ್ತಗಳು, ಆಟದ ಮೈದಾನ, ಮಾರುಕಟ್ಟೆ, ಉದ್ಯಾನವನ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರುಗಳಾದ ದನ, ಎಮ್ಮೆ, ಕರು ಹಾಗೂ ಹಂದಿಗಳನ್ನು ಹೆಚ್ಚಾಗಿ ಬಿಡಲಾಗುತ್ತಿದೆ. ಜಾನುವಾರುಗಳಿಂದ ಪಾದಚಾರಿಗಳು, ಮಕ್ಕಳು, ವೃದ್ಧರು, ವಾಹನ ಚಾಲಕರು ಮತ್ತು ವ್ಯಾಪಾರಸ್ಥರಿಗೆ ಈಗಾಗಲೇ ಸಾಕಷ್ಟು ಅನಾಹುತಗಳು ಸಂಭವಿಸಿರುತ್ತವೆ. ನಿರಂತರವಾಗಿ ಇವುಗಳಿಂದ ಸಾರ್ವಜನಿಕರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ.
ಈ ಕುರಿತು ಮಹಾನಗರ ಪಾಲಿಕೆಯ ಸಹಾಯವಾಣಿಗೆ ಸಾಕಷ್ಟು ದೂರುಗಳು ಸಹ ಸ್ವೀಕೃತವಾಗಿರುತ್ತವೆ. ಬಿಡಾಡಿ ಜಾನುವಾರು ಹಾಗೂ ಹಂದಿಗಳ ಮಾಲೀಕರು ತಮ್ಮ ತಮ್ಮ ಜಾನುವಾರುಗಳನ್ನು 24 ಗಂಟೆಗಳೊಳಗಾಗಿ ತಮ್ಮ ಸುಪರ್ದಿಗೆ ತೆಗೆದುಕೊಂಡು ಸಾಕಬೇಕು. ತಪ್ಪಿದಲ್ಲಿ ರಸ್ತೆಗಳಲ್ಲಿ ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿರುವ ಜಾನುವಾರುಗಳನ್ನು ಬಿಡಾಡಿ ಪ್ರಾಣಿಗಳೆಂದು ಪರಿಗಣಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಪಾಲಿಕೆಯಿಂದ ಹಿಡಿದು ವಿವಿಧ ಗೋಶಾಲೆಗೆ ಬಿಡಲಾಗುವುದು. ಹಂದಿಗಳನ್ನು ಹಿಡಿದು ಸ್ಥಳಾಂತರಿಸಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.