Site icon MOODANA Web Edition

ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ  ಕಟ್ಟಡ ಕಾರ್ಮಿಕರಿಗೆ ಕರೆ ನೀಡಿದ ಹಿರಿಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್‍ಕುಮಾರ್

ಬೆಂಗಳೂರು, ಡಿಸೆಂಬರ್ 30 (ಕರ್ನಾಟಕ ವಾರ್ತೆ):

ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಕಟ್ಟಡ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹಿರಿಯ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಪಿ.ಎಸ್. ದಿನೇಶ್‍ಕುಮಾರ್ ಅವರು ತಿಳಿಸಿದರು.

ಇಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ನಗರ ಜಿಲ್ಲೆ, ಇವರ ಸಹಯೋಗದೊಂದಿಗೆ “ಕಟ್ಟಡ ಕಾರ್ಮಿಕರನ್ನು ಕಟ್ಟಡ ನಿರ್ಮಾಣ. ಸ್ಥಳದಲ್ಲಿಯೇ ಫಲಾನುಭವಿಗಳನ್ನಾಗಿ ನೋಂದಾಯಿಸುವ ಮೊಬೈಲ್ ವಾಹನಗಳಿಗೆ ಚಾಲನೆ, ಕಟ್ಟಡ ಕಾರ್ಮಿಕರಿಗಾಗಿ ಇರುವ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಪ್ರದರ್ಶನ ಮಳಿಗೆಗಳು ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದ ಅವರು “ಸರ್ವರಿಗೂ ಸಮಪಾಲು ಸರ್ವರಿಗೂ ಸಮಪಾಲು” ರಾಷ್ಟ್ರಕವಿ ಕುವೆಂಪು ಅವರು ತಿಳಿಸಿರುವಂತೆ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಕಾನೂನಿನ ಅಡಿಯಲ್ಲಿ ಸಿಗಬೇಕಾದ ಸವಲತ್ತುಗಳು ಹಾಗೂ ಸೌಲಭ್ಯಗಳು ತಲುಪಿಸುವ ಊದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರವು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ನಮ್ಮ ದೇಶವು ಪ್ರಜಾಪ್ರಭುತ್ವ ದೇಶವಾಗಿದ್ದು ಪ್ರಜೆಗಳು ನ್ಯಾಯದಿಂದ ವಂಚಿತರಾಗಬಾರದು ಎಂಬ ಧ್ಯೇಯೋದ್ದೇಶವನ್ನು ಹೊಂದಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯದ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ.

43 ವಲಯಗಳಲ್ಲಿ ಅಸಂಘಟಿತ ಕಾರ್ಮಿಕರನ್ನು ಗುರುತಿಸಲಾಗಿದ್ದು, ಅವರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಕಟ್ಟಡ ಕಾರ್ಮಿಕರು ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ, ಮದುವೆ ಸಮಾರಂಭಗಳಿಗೆ ಸಹಾಯಧನ, ಇನ್ನಿತರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಅದನ್ನು ಎಲ್ಲರೂ ನ್ಯಾಯಯುತವಾಗಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಅವರು ಮಾತನಾಡಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದೆ. ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಲು ನಿರ್ಮಾಣ ಕಾಮಗಾರಿಗಳ ವೆಚ್ಚದ ಶೇಕಡ 1 ರಷ್ಟು ಮೊತ್ತವನ್ನು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸುಂಕ ಕಾಯ್ದೆ, 1996 ಮತ್ತು ಕೇಂದ್ರ ನಿಯಮಗಳು, 1998ರ ಪ್ರಾವಧಾನಗಳಡಿ ಉದ್ಯೋಗದಾತರಿಂದ ಸುಂಕವನ್ನು ಸಂಗ್ರಹಿಸಲಾಗುತ್ತಿದೆ. ಮಂಡಳಿಯಲ್ಲಿ ಇದುವರೆಗೂ 45.42 ಲಕ್ಷ ಕಾರ್ಮಿಕರು ನೋಂದಣಿ ಆಗಿರುತ್ತಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಇದುವರೆಗೂ 4.84 ಲಕ್ಷ ಕಾರ್ಮಿಕರು ನೋಂದಣಿಯಾಗಿರುತ್ತಾರೆ. ಈ ಜಿಲ್ಲೆಗಳಲ್ಲಿ ಕಳೆದ 03 ವರ್ಷಗಳಲ್ಲಿ 59.800 ಫಲಾನುಭವಿಗಳಿಗೆ ವಿವಿಧ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಗಳ ರೂಪದಲ್ಲಿ ಒಟ್ಟು ರೂ.99.31 ಕೋಟಿಗಳಷ್ಟು ಸಹಾಯಧನವನ್ನು ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿರಂತರವಾಗಿ ಬೃಹತ್ ನಿರ್ಮಾಣ ಕಾಮಗಾರಿಗಳು ನಿರ್ಮಾಣಗೊಳ್ಳುತ್ತಿದ್ದು, ಅವುಗಳಲ್ಲಿ ಕಾರ್ಯನಿರ್ವಹಿಸಲು ನಿರ್ಮಾಣದಾರರು ವಿವಿಧ ರಾಜ್ಯಗಳಿಂದ ವಲಸೆ ಕಾರ್ಮಿಕರನ್ನು ಕರೆತಂದು ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿರುತ್ತದೆ. ಇಂತಹ ಕಾರ್ಮಿಕರನ್ನು ಸ್ಥಳದಲ್ಲಿಯೇ ಮಂಡಳಿಯ ಫಲಾನುಭವಿಗಳನ್ನಾಗಿ ನೋಂದಾಯಿಸಲು ಈ ವಿಶೇಷ ನೋಂದಣಿ ಅಭಿಯಾನವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ಮಾಡುವ ಅರ್ಹ ಕಾರ್ಮಿಕರನ್ನು ಮಂಡಳಿಯ ಫಲಾನುಭವಿಗಳನ್ನಾಗಿ ನೋಂದಾಯಿಸಿ ಅವರಿಗೆ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದರು.

ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳು ಹಾಗೂ ಅಸಂಘಟಿತ ವಲಯದ ಕಾರ್ಮಿಕ ಕಾನೂನು ಸೇವೆಗಳ  ಯೋಜನೆ 2015ರ ಅಧ್ಯಕ್ಷರಾದ  ಎ.ವಿ ಚಂದ್ರಶೇಖರ ಅವರು ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು, ಕಟ್ಟಡ ಕಾರ್ಮಿಕರಿಗೆ ಕಾನೂನಿನ ಅಡಿಯಲ್ಲಿ ಬರುವ ವಿವಿಧ ಯೋಜನೆಗಳ ಮಾಹಿತಿಯನ್ನು ನೀಡುತ್ತಾರೆ.  ನ್ಯಾಯಾಧೀಶರು ಸಹ ಜನಸಾಮಾನ್ಯರಿಗೆ ಹಾಗೂ ಕಾರ್ಮಿಕರಿಗೆ  ಅಗ್ಗಿಂದಾಗೆ ಕಾನೂನಿನ ಅರಿವು – ನೆರವು  ಒದಗಿಸುತ್ತಾರೆ. ಅನಕ್ಷರತೆ, ಬಡತನದಲ್ಲಿರುವರಿಗೆ ಅಗತ್ಯವಾದ ಕಾನೂನಿನ ಮಾಹಿತಿಯನ್ನು ಸಹ ನೀಡುತ್ತಾರೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವರದರಾಜ್ ಬಿ. ಅವರು ಸ್ವಾಗತ ಭಾಷಣ ಮಾಡಿದರು.

 ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಜೈಶಂಕರ್, ಕಾರ್ಮಿಕ ಇಲಾಖೆಯ ಆಯುಕ್ತರಾದ ಡಾ. ಹೆಚ್.ಎನ್. ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ  ಸಿ.ಇ.ಓ ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ ಸೇರಿದಂತೆ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಾನೂನು ಸೇವೇಗಳ ಪ್ರಾಧಿಕಾರದ ಅಧಿಕಾರಿಗಳು ಸಿಬ್ಬಂದಿಗಳು, ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

Exit mobile version