ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಜ.26: ನಮ್ಮ ದೇಶ ಪ್ರಜಾಪ್ರಭುತ್ವ ದೇಶವಾಗಿದೆ. ದೇಶದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ ಹೇಳಿದರು.
ಇಂದು ತಾಲೂಕು ಆಡಳಿತ ಸೌದದಲ್ಲಿ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವ ರಾಷ್ಟ್ರೀಯ ಹಬ್ಬವಾಗಿದೆ. ರಾಷ್ಟ್ರೀಯ ಹಬ್ಬವು ದೇಶದ ಏಕತೆ ಮತ್ತು ಹೆಮ್ಮೆಯನ್ನು ಕಾಪಾಡಿಕೊಳ್ಳಲು ನಮ್ಮೆಲ್ಲರಿಗೂ ಅವಕಾಶವನ್ನು ನೀಡಿರುತ್ತದೆ. ದೇಶವನ್ನು ಇನ್ನಷ್ಟು ಅಭಿವೃಧಿಯ ಪಥದತ್ತ ಸಾಗಿಸೋಣ ಎಂದರು.
ಶಾಸಕರಾದ ಎನ್.ಎಚ್.ಕೋನರೆಡ್ಡಿ ಮಾತನಾಡಿ, ನಮ್ಮದು ಪ್ರಜಾಪ್ರಭುತ್ವ ದೇಶ, ಪ್ರಜಾಪ್ರಭುತ್ವ ನಮ್ಮೆಲ್ಲರಿಗೂ ಒಂದು ವರದಾನವಿದ್ದಂತೆ. ಭಾರತದಲ್ಲಿ ಸಂವಿಧಾನ ಜಾರಿಗೆ ಬಂದಿದ್ದರಿಂದಲೇ, ದೇಶದ ಪ್ರತಿಯೋಬ್ಬ ಪ್ರಜೆಗೂ ಸಮಾನ ಶಿಕ್ಷಣ, ಮೂಲಭೂತ ಹಕ್ಕುಗಳು ನಮಗೆ ದೊರಕಿವೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ತಮ್ಮ ಸರ್ಕಾರ ನುಡಿದಂತೆ ನಡೆದಿದೆ. ಸಂವಿಧಾನ ಭಾರತದ ಸರ್ವೋಚ್ಚ ಕಾನೂನುನಾಗಿದೆ. ಸಂವಿಧಾನ ರಚನೆಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ ಅವರ ಕೊಡುಗೆ ಅಪಾರವಾಗಿದೆ. ಆದ್ದರಿಂದ ಅವರನ್ನು ಭಾರತದ ಸಂವಿಧಾನದ ಶಿಲ್ಪಿ ಎಂದು ಕರೆಯುತ್ತಾರೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ನಗರ ತಹಶೀಲ್ದಾರರಾದ ಕಲಗೌಡ ಪಾಟೀಲ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ರಾಮಚಂದ್ರ ಹೊಸಮನಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.