Site icon MOODANA Web Edition

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಭರಮಗೌಡ(ರಾಜು) ಅಲಗೌಡ ಕಾಗೆ ಅವರು ಅಧಿಕಾರ ಸ್ವೀಕಾರಸಂಸ್ಥೆಯ ಅಭಿವೃದ್ಧಿಗೆ ಎಲ್ಲರ ಸಹಾಯ, ಸಹಕಾರ ಮುಖ್ಯ-ಭರಮಗೌಡ(ರಾಜು) ಅಲಗೌಡ ಕಾಗೆ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಫೆ.2: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಸ್ಥೆಯಲ್ಲಿನ ನೂನ್ಯತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುವೆ. ನನಗೆ ವಹಿಸಿದ ಜವಾಬ್ದಾರಿಯನ್ನು ಪಾರದಾರ್ಶಕವಾಗಿ ನಿಭಾಯಿಸುತ್ತೇನೆ. ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಂಸ್ಥೆಯನ್ನು ಲಾಭದ ಹಾದಿಗೆ ತರಲು ಪ್ರಯತ್ನಿಸುವೆ. ಹೀಗಾಗಿ ಎಲ್ಲರ ಸಹಾಯ ಮತ್ತು ಸಹಕಾರ ಬಹಳ ಮುಖ್ಯ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ಭರಮಗೌಡ(ರಾಜು) ಅಲಗೌಡ ಕಾಗೆ ಹೇಳಿದರು.

ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಬಸ್ ಖರೀದಿ, ಸಿಬ್ಬಂದಿಗಳ ವೇತನ ಪರಿಷ್ಕರಣೆ, ಭ್ರಷ್ಟಾಚಾರ ತಡೆ ಸೇರಿದಂತೆ ಸಂಸ್ಥೆಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಮೇಲೆ ಒತ್ತಡ ಹಾಕಿ ಹೆಚ್ಚಿನ ಅನುದಾನ ತರಲಾಗುವುದು. ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಸಂಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲಾಗುವುದು. ಅಲ್ಲದೇ ಸಂಸ್ಥೆಯಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಕಾಲಾವಕಾಶ ಬೇಕಾಗಿದೆ. ಸಂಸ್ಥೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಭರತ್ ಎಸ್ ಮಾತನಾಡಿ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಅಲ್ಲದೇ ಸಾವಿರ ಟ್ರಿಪ್ ಹೆಚ್ಚಳವಾಗಿರುತ್ತವೆ. 4 ಸಾವಿರದ 8 ನೂರಕ್ಕೂ ಹೆಚ್ಚು ಬಸ್‍ಗಳು ಸಂಸ್ಥೆಯಲ್ಲಿವೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ 50 ಬಸ್‍ಗಳು ಗ್ರಾಮಾಂತರ ವಿಭಾಗಕ್ಕೆ ನೀಡಲಾಗಿದೆ. 20 ಹೊಸ ಪಲ್ಲಕ್ಕಿ ಬಸ್‍ಗಳಲ್ಲಿ 10 ಬಸ್‍ಗಳು ಬಂದಿವೆ. ಉಳಿದ 10 ಬಸ್‍ಗಳು ಮುಂದಿನ ದಿನಗಳಲ್ಲಿ ಸಂಸ್ಥೆಗೆ ಸೇರ್ಪಡೆಯಾಗಲಿವೆ. ಅಲ್ಲದೇ ಎಲೆಕ್ಟ್ರೀಕ್ ಬಸ್‍ಗಳು ಹುಬ್ಬಳ್ಳಿ ಧಾರವಾಡ ಮತ್ತು ಹುಬ್ಬಳ್ಳಿ ಬೆಳಗಾವಿ ನಡುವೆ ಕಾರ್ಯಾಚರಣೆ ಮಾಡಲಿವೆ. 15 ವರ್ಷಕ್ಕೂ ಹೆಚ್ಚಿನ ಹಳೆಯ ಬಸ್‍ಗಳನ್ನು ಗುಜರಿಗೆ ಹಾಕಲಾಗುತ್ತದೆ ಎಂದು ಮಾಹಿತಿ ನೀಡಿದರು.
ಶಾಸಕರಾದ ಎನ್.ಎಚ್. ಕೋನರೆಡ್ಡಿ ಪತ್ರಿಕಾಗೋಷ್ಠಿಯಲ್ಲಿದ್ದರು.

Exit mobile version