ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) :
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್.ಎಸ್.ಎಸ್. ಕೋಶ ಹಾಗೂ ಬೆಂಗಳೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಾರ್ಚ್ 24 ರಿಂದ 26ರವರೆಗೆ ಮೂರು ದಿನಗಳ ಕಾಲ “ಜಾಗತಿಕ ಯುವ ಸಂಸತ್ತು” (World Youth Parliament) ಕಾರ್ಯಕ್ರಮವನ್ನು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 24 ರಂದು ಬೆಳಿಗ್ಗೆ 11:00 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಸಂಜೆ 05:30ಕ್ಕೆ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.
ಈ ಮಹತ್ವದ ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಹಾಗೂ ಭಾರತದ ವಿವಿಧ ರಾಜ್ಯಗಳಿಂದ ಸುಮಾರು 350ಕ್ಕೂ ಹೆಚ್ಚು ಯುವ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ವಿವಿಧ ಜಾಗತಿಕ ಮತ್ತು ಸಾಮಾಜಿಕ ವಿಷಯಗಳ ಕುರಿತು ಯುವಜನರು ತಮ್ಮ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲು ಇದೊಂದು ವಿಶಿಷ್ಟ ವೇದಿಕೆಯಾಗಲಿದೆ.
ಯುವಜನತೆಯಲ್ಲಿ ನಾಯಕತ್ವ ಗುಣ ಬೆಳೆಸುವ ಮತ್ತು ಜಾಗತಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಅತ್ಯಂತ ಪ್ರಮುಖವಾಗಿದೆ ಎಂದು ರಾಜ್ಯ ಎನ್.ಎಸ್.ಎಸ್. ಅಧಿಕಾರಿಗಳಾದ ಡಾ. ಪ್ರತಾಪ್ ಲಿಂಗಯ್ಯ ಅವರು ತಿಳಿಸಿದ್ದಾರೆ.









